ತುಮಕೂರು :
ಕೊರೊನಾ ಮಹಾಮಾರಿ ರುದ್ರನರ್ತನದಿಂದಾಗಿ ಕಳೆದ 8 ತಿಂಗಳಿನಿಂದ ತೆರೆಯದ ಕಾಲೇಜುಗಳು ನಿನ್ನೆಯಿಂದ ಪುನರಾರಂಭವಾಗಿದ್ದರೂ ಸಹ ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳ ಸಂಖ್ಯೆ ವಿರಳವಾಗಿರುವ ಹಿನ್ನೆಲೆಯಲ್ಲಿ ತರಗತಿಗಳು ಬಣಗುಡುತ್ತಿವೆ.
ತುಮಕೂರು ವಿಶ್ವ ವಿದ್ಯಾನಿಲಯ ವ್ಯಾಪ್ತಿಯ ಸರ್ಕಾರಿ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಪದವಿ ಕಾಲೇಜು, ಸಿದ್ದಗಂಗಾ ಪದವಿ ಕಾಲೇಜು, ಸಿದ್ದಗಂಗಾ ಡಿಪೆÇ್ಲೀಮಾ ಕಾಲೇಜು ಸೇರಿದಂತೆ ನಗರದ ವಿವಿಧ ಸ್ನಾತಕ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಕಾಲೇಜುಗಳಲ್ಲಿ ತರಗತಿಗಳು ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟು ಪಾಲನೆಯೊಂದಿಗೆ ತರಗತಿಗಳನ್ನು ಆರಂಭಿಸಿವೆ
ಎಲ್ಲ ಕಾಲೇಜುಗಳಲ್ಲೂ ವಿದ್ಯಾರ್ಥಿಗಳು ತರಗತಿ ಪ್ರವೇಶಿಸುವ ಮುನ್ನ ಥರ್ಮಲ್ ಸ್ಕ್ರೀನಿಂಗ್ ನಡೆಸಿ, ಸ್ಯಾನಿಟೈಸ್ ಹಾಕಲಾಗುತ್ತಿದ್ದು, ತರಗತಿಗಳನ್ನು ಸಾಮಾಜಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಒಂದು ಡೆಸ್ಕ್ಗೆ ಇಬ್ಬರು ವಿದ್ಯಾರ್ಥಿಗಳು ಕುಳಿತುಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ.
ಆದರೆ ಪೋಷಕರು ಇನ್ನು ಮಕ್ಕಳನ್ನು ಕಾಲೇಜುಗಳಿಗೆ ಕಳುಹಿಸಲು ಮನಸ್ಸು ಮಾಡಿದಂತಿಲ್ಲ. ಬೆರಳೆಣಿಕೆಯಷ್ಟು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಮಾತ್ರ ಕಾಲೇಜುಗಳತ್ತ ಮುಖ ಮಾಡಿದ್ದು, ಬಹುತೇಕ ವಿದ್ಯಾರ್ಥಿಗಳು ಇನ್ನು ಕಾಲೇಜುಗಳಿಗೆ ಬರುವ ಮನಸ್ಸು ಮಾಡಿಲ್ಲ.
ಕೊರೊನಾ ಮಹಾಮಾರಿಯ ಭೀಕರ ಸ್ವರೂಪವನ್ನು ಈಗಾಗಲೇ ನೋಡಿರುವ ಪೋಷಕರು ತಮ್ಮ ಮಕ್ಕಳ ಆರೋಗ್ಯದ ಹಿತದೃಷ್ಠಿಯಿಂದ ಕಾಲೇಜುಗಳಿಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ.
ಬೆಳಿಗ್ಗೆ 8.30ಕ್ಕೆ ಕೆಲ ಕಾಲೇಜುಗಳು ಆರಂಭವಾಗುವ ಮುನ್ನೂಚನೆಯ ವೇಳಾಪಟ್ಟಿಯನ್ನು ನೋಟಿಸ್ ಬೋರ್ಡ್ನಲ್ಲಿ ಹಾಕಲಾಗಿದೆ. ಜತೆಗೆ ಎಲ್ಲ ವಿದ್ಯಾರ್ಥಿಗಳಿಗೂ ಎಸ್.ಎಂ.ಎಸ್. ಮೂಲಕ ಸಂದೇಶ ಕಳುಹಿಸಲಾಗಿದೆ. ಆದರೂ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಅತ್ಯಂತ ವಿರಳವಾಗಿದೆ.
ತುಮಕೂರು ವಿ.ವಿ. ಕುಲಪತಿ ಪ್ರೊ|| ಸಿದ್ದೇಗೌಡ ಅವರು ಪ್ರತಿಕ್ರಿಯಿಸಿ, ಕೋವಿಡ್ ಇದ್ದರೂ ಸರ್ಕಾರ ಮತ್ತು ಯುಜಿಸಿ ಮಾರ್ಗಸೂಚಿ ಅನುಸರಿಸಿ ಕಾಲೇಜುಗಳನ್ನು ತೆರೆಯುವಂತೆ ಆದೇಶ ಹೊರಡಿಸಿದೆ. ಹಾಗಾಗಿ ಎಸ್ಒಪಿ ಪ್ರಕಾರ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕಾಲೇಜು ಆವರಣ ಹಾಗೂ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲಾಗಿದೆ. ಪ್ರತಿಯೊಬ್ಬರಿಗೂ ಕೊರೊನಾ ನೆಗೆಟಿವ್ ವರದಿ ಹಾಗೂ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಇದಕ್ಕಾಗಿ ಟಾಸ್ಕ್ ರ್ಸ್ ರಚಿಸಲಾಗಿದೆ ಎಂದರು.
ಕಾಲೇಜಿಗೆ ಹಾಜರಾಗಲು ಬಯಸದ ವಿದ್ಯಾರ್ಥಿಗಳಿಗೆ ಆನ್ಲೈನ್ ಪಾಠ ಮಾಡಲು ಸಹ ಕ್ರಮ ಕೈಗೊಳ್ಳಲಾಗಿದೆ. ಈ ಸಂಬಂಧ ಎಲ್ಲ ಕಾಲೇಜುಗಳ ಪ್ರಾಂಶುಪಾಲರುಗಳಿಗೆ ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳು ಮತ್ತು ಪ್ರೊಷಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು.
ಎಲ್ಲ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾದರೆ ಹಂತ ಹಂತವಾಗಿ ಹಾಸ್ಟೆಲ್ ತೆರೆಯಲು ಸಿದ್ದತೆ ಮಾಡಿಕೊಳ್ಳಲಾಗುವುದು ಎಂದರು.
ಸಿದ್ದಗಂಗಾ ಮಹಿಳಾ ಪದವಿ ಕಾಲೇಜಿನ ಪ್ರಾಚಾರ್ಯ ಕೆ.ಸಿ. ಜಯಸ್ವಾಮಿ ಮಾತನಾಡಿ, ನ. 17 ರಿಂದ ಪದವಿ ಆಫ್ಲೈನ್ ಕಾಲೇಜು ಪುನರಾರಂಭ ಮಾಡುವಂತೆ ಸರ್ಕಾರ ಆದೇಶ ಮಾಡಿರುವುದರಿಂದ ವಿದ್ಯಾರ್ಥಿಗಳಿಗೆ ಈ ಬಗ್ಗೆ ತಿಳಿಸಲಾಗಿದೆ. ವಿದ್ಯಾರ್ಥಿಗಳು ಪೋಷಕರಿಂದ ದೃಢೀಕರಣ ಪತ್ರ ಮತ್ತು ಕೊರೊನಾ ನೆಗೆಟಿವ್ ವರದಿ ತರುವಂತೆ ತಿಳಿಸಲಾಗಿದೆ. ಹಾಗಾಗಿ ಈ ವಿಚಾರದಲ್ಲಿ ವಿದ್ಯಾರ್ಥಿಗಳು ಹಿಂದೇಟು ಹಾಕಿದ್ದಾರೆ ಎಂಬುದು ತಿಳಿದು ಬರುತ್ತಿದೆ ಎಂದರು.
ಈ ವಾರದಲ್ಲಿ 2-3 ದಿನ ವಿದ್ಯಾರ್ಥಿಗಳ ಬರುವಿಕೆಗಾಗಿ ಕಾಯುತ್ತೇನೆ. ಸರ್ಕಾರದ ಆದೇಶದ ಮೇರೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಪ್ರತಿದಿನ ತರಗತಿಗಳು ಮುಗಿದ ನಂತರ ಸ್ಯಾನಿಟೈಸ್ ಮಾಡಲು ಸಹ ಕ್ರಮ ವಹಿಸಲಾಗುತ್ತಿದೆ ಎಂದು ಅವರು ಹೇಳಿದರು.