ತುಮಕೂರು :

      ಶ್ರೀ ಸಿದ್ದಗಂಗಾ ಮಠದ ಆವರಣದಲ್ಲಿ ಮಾರ್ಚ್ 1 ರಿಂದ 15ರವರೆಗೆ ನಡೆಯಲಿರುವ ಕೃಷಿ ಮತ್ತು ಕೈಗಾರಿಕಾ ವಸ್ತುಪ್ರದರ್ಶನದಲ್ಲಿ ಕೋವಿಡ್ ಮಾರ್ಗಸೂಚಿಯನ್ನು ಅನುಸರಿಸಿ ವಿಶಿಷ್ಟ ರೀತಿಯಲ್ಲಿ ಇಲಾಖೆಗಳು ವಸ್ತುಪ್ರದರ್ಶನವನ್ನು ಏರ್ಪಡಿಸಬೇಕೆಂದು ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಲತಾ ರವಿಕುಮಾರ್ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

       ಶ್ರೀ ಸಿದ್ದಗಂಗಾ ಮಠದಲ್ಲಿಂದು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ವಸ್ತುಪ್ರದರ್ಶದಲ್ಲಿ ಕೋವಿಡ್-19 ಮಾರ್ಗಸೂಚಿಗಳನ್ನು ಅನುಸರಿಸಿ ಸಾರ್ವಜನಿಕರಿಗೆ ತಮ್ಮ ಇಲಾಖಾ ಯೋಜನೆಗಳ ಬಗ್ಗೆ ಅರಿವು ಮೂಡಿಸಬೇಕು. ಹೊರ ಜಿಲ್ಲೆ ಹಾಗೂ ಗ್ರಾಮೀಣ ಪ್ರದೇಶಗಳಿಂದ ಪ್ರದರ್ಶನಕ್ಕೆ ಆಗಮಿಸುವವರಿಗೆ ಅನುಕೂಲವಾಗುವಂತೆ ಯೋಜನೆಗಳ ಮಾಹಿತಿಯನ್ನು ಕನ್ನಡದಲ್ಲಿಯೇ ಪ್ರದರ್ಶಿಸಬೇಕು. ಸ್ವಚ್ಛತೆಗೆ ಆದ್ಯತೆ ನೀಡಬೇಲ್ಲದೆ ಕಳೆದ ಬಾರಿಗಿಂತಲೂ ಈ ಬಾರಿ ವಿಶೇಷವಾಗಿ ವಸ್ತುಪ್ರದರ್ಶನ ಮೂಡಿ ಬರಬೇಕೆಂದು ಸೂಚಿಸಿದರು.

      ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಣಾಧಿಕಾರಿ ಶುಭಾ ಕಲ್ಯಾಣ್ ಮಾತನಾಡಿ ವಸ್ತು ಪ್ರದರ್ಶನದಲ್ಲಿ ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಪಶು ಸಂಗೋಪನಾ ಇಲಾಖೆಗಳು ನೈಜ ಪ್ರಾತ್ಯಕ್ಷಿಕೆಯನ್ನು ಪ್ರದರ್ಶಿಸಬೇಕು. ಪ್ರರ್ದಶನಕ್ಕೆ ಬರುವ ರೈತರಿಗೆ ಕ್ಷೇತ್ರ ತಜ್ಞರಿಂದ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಇತ್ತೀಚಿಗೆ ಗ್ರಾಮೀಣ ಭಾಗಗಳಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿ ಮಹಿಳೆಯರು ಮತ್ತು ಮಕ್ಕಳ ಮೇಲೆ ದಾಳಿ ಮಾಡುತ್ತಿದ್ದು, ಅರಣ್ಯ ಇಲಾಖೆ ವತಿಯಿಂದ ಇದರ ಬಗ್ಗೆ ವಸ್ತು ಪ್ರದರ್ಶನದಲ್ಲಿ ದೃಶ್ಯಗಳ ಮೂಲಕ ವಿಶೇಷ ಅರಿವು ಕಾರ್ಯಕ್ರಮ ಏರ್ಪಡಿಸಬೇಕೆಂದು ತಿಳಿಸಿದರು.

      ವಸ್ತುಪ್ರದರ್ಶನದಲ್ಲಿ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

      ಸಿದ್ದಗಂಗಾ ಮಠದ ಆಡಳಿತಾಧಿಕಾರಿ ವಿಶ್ವನಾಥಯ್ಯ ಮಾತನಾಡಿ ಪ್ರತಿ ಬಾರಿಯಂತೆ ಈ ಬಾರಿಯೂ ವಸ್ತು ಪ್ರದರ್ಶನದಲ್ಲಿ ಭಾಗವಹಿಸುವ ಇಲಾಖೆಗಳಿಗೆ ಮಠದ ವತಿಯಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.

      ಮಠದ ಗಂಗಾಧರಯ್ಯ, ರೇಣುಕಯ್ಯ, ಪಾಲಿಕೆ ಆಯುಕ್ತೆ ರೇಣುಕಾ, ಆರೊಗ್ಯ ಇಲಾಖೆ, ಕೃಷಿ ಇಲಾಖೆ, ಅರಣ್ಯ ಇಲಾಖೆ ಸೇರಿದಂತೆ ಇತರೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಪೂರ್ವಭಾವಿ ಸಭೆಯಲ್ಲಿ ಉಪಸ್ಥಿತರಿದ್ದರು.

 

(Visited 8 times, 1 visits today)