ತುಮಕೂರು  : 

       ಹೆಚ್ಚು ಅನುದಾನ ಬಿಡುಗಡೆ ಮಾಡುವ ಮೂಲಕ ರಾಜ್ಯದ ಸಮಗ್ರ ನೀರಾವರಿ ಅಭಿವೃದ್ಧಿಗೆ ಒತ್ತು ನೀಡಿ ಅಂತರ್ಜಲ ಮಟ್ಟವನ್ನು ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು.

      ತಿಪಟೂರು ಪಟ್ಟಣದಲ್ಲಿಂದು ಮಿನಿ ವಿಧಾನಸೌಧ, ನಗರ ಸಭೆ ಕಚೇರಿ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಕಟ್ಟಡಗಳ ಉದ್ಘಾಟನೆ ನಂತರ ಸರ್ಕಾರಿ ಬಾಲಕರ ಕಾಲೇಜಿನ ಆವರಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

      ಎಷ್ಟೇ ಕಷ್ಟವಾದರೂ ರಾಜ್ಯದ ಸಮಗ್ರ ನೀರಾವರಿ ಯೋಜನೆಗೆ ಹೆಚ್ಚು ಅನುದಾನ ಬಿಡುಗಡೆ ಮಾಡಿ, ಕೇಂದ್ರ ಸರಕಾರದ ಸಹಕಾರ ಪಡೆದು ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಿ ಕೆರೆ-ಕಟ್ಟೆ ತುಂಬಿಸಿ ಅಂತರ್ಜಲ ಮಟ್ಟದ ಕುಸಿತ ತಪ್ಪಿಸಲಾಗುವುದು ಎಂದರಲ್ಲದೆ ಕಳೆದ ಹತ್ತಾರು ವರ್ಷಗಳಿಗಿಂತಲೂ ರೈತರು ಈ ಬಾರಿ ದಾಖಲೆ ಪ್ರಮಾಣದ ಬೆಳೆ ಬೆಳೆದಿದ್ದು, ಹಗಲು-ರಾತ್ರಿ ದುಡಿಯುವ ಅನ್ನದಾತರಿಗೆ ನಾಡಿನ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ. ತಿಪಟೂರಿನಲ್ಲಿ ಆಗಬಹುದಾದ ಕೆಲಸಗಳನ್ನು ಹಂತ ಹಂತವಾಗಿ ಮಾಡಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು.

       ರಾಜ್ಯದ ಸಮಗ್ರ ಅಭಿವೃದ್ಧಿ ಗಮನದಲ್ಲಿಟ್ಟುಕೊಂಡು ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಕೋವಿಡ್ ವ್ಯಾಪಕವಾಗಿ ಹರಡುತ್ತಿದ್ದು, ಸಾಮಾಜಿಕ ಅಂತರ ಮತ್ತು ಮಾಸ್ಕ್ ಕಡ್ಡಾಯವಾಗಿ ಧರಿಸುವಂತೆ ಜನರಲ್ಲಿ ಮನವಿ ಮಾಡಿದರು.
ಪ್ರಧಾನ ಮಂತ್ರಿ ಮೋದಿ ಅವರ ಅಪೇಕ್ಷೆಯಂತೆ 2023ರೊಳಗೆ ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಗಮನ ಹರಿಸಿದ್ದು, ಕಷ್ಟದ ಪರಿಸ್ಥಿತಿಯಲ್ಲಿ ರೈತರಿಗೆ ಕೇಂದ್ರದ ಅನುದಾನದೊಂದಿಗೆ ರಾಜ್ಯದ ಅನುದಾನ ನೀಡಲಾಗುತ್ತಿದೆ ಎಂದರು. ಎತ್ತಿನಹೊಳೆ ಮೊದಲ ಹಂತದ ಕಾಮಗಾರಿ ಮುಕ್ತಾಯ ಹಂತದಲ್ಲಿದ್ದು, ಭದ್ರಾ ಮೇಲ್ದಂಡೆ ಯೋಜನೆ ಶೀಘ್ರವಾಗಿ ಪೂರ್ಣಗೊಳಿಸಲು ಕ್ರಮವಹಿಸಲಾಗುವುದು. ಬೆಂಗಳೂರಿನ ವೃಷಭಾವತಿ ನದಿಯ ಸಂಸ್ಕರಿಸಿದ ನೀರನ್ನು ತುಮಕೂರು ಸೇರಿದಂತೆ ನಾಲ್ಕು ಜಿಲ್ಲೆಗಳ 234 ಕೆರೆಗಳಿಗೆ ನೀರು ತುಂಬಿಸಲು 500 ಕೋಟಿ ವೆಚ್ಚದಲ್ಲಿ ಯೋಜನೆ ರೂಪಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

       ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಮೂಲಕ ಗ್ರಾಮೀಣರ ಸಮಸ್ಯೆಗೆ ಸ್ಪಂದಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದ್ದು, ಮುಂದಿನ ದಿನದಲ್ಲಿ ಮುಖ್ಯ ಕಾರ್ಯದರ್ಶಿಗಳು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು , ಜಿಲ್ಲಾ ಉಸ್ತುವಾರಿ ಸಚಿವರು ಸಹ ತಿಂಗಳಲ್ಲಿ ಒಂದು ದಿನ ಜಿಲ್ಲೆಯಲ್ಲಿ ವಾಸ್ತವ್ಯ ಮಾಡಲು ಸೂಚಿಸಿರುವುದಾಗಿ ತಿಳಿಸಿದ ಅವರು ಏಪ್ರಿಲ್ ಬಜೆಟ್ ಮುಗಿದ ಬಳಿಕ ಪ್ರತಿ ತಿಂಗಳು ಒಂದು ಜಿಲ್ಲೆಗೆ ಭೇಟಿ ನೀಡಿ ಉದ್ಘಾಟನೆ ಅಥವಾ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಜಿಲ್ಲೆಯ ಸಮಸ್ಯೆ ತಿಳಿದುಕೊಳ್ಳುವ ಪ್ರಯತ್ನ ಮಾಡುತ್ತೇನೆ ಎಂದರು.
ಕರ್ನಾಟಕ ಸಮಗ್ರ ಅಭಿವೃದ್ಧಿ ಹಿನ್ನೆಲೆಯಲ್ಲಿ ಕೋವಿಡ್ ಸಂದರ್ಭದಲ್ಲಿಯೂ ಉತ್ತಮ ಬಜೆಟ್ ಮಂಡಿಸಲಾಗಿದೆ.

      ಮಹಿಳೆಯರಿಗೆ ವಿಶೇಷ ಆದ್ಯತೆ ನೀಡಲಾಗಿದೆ. ಮಹಿಳೆಯರು ತಯಾರಿಸಿದ ವಸ್ತುಗಳಿಗೆ ಉತ್ತಮ ಬೆಲೆ ಸಿಗಬೇಕು. ಮಹಿಳೆಯರ ಸಬಲೀಕರಣ ಆಗಬೇಕು. ಕಡಿಮೆ ಬಡ್ಡಿ ದರದಲ್ಲಿ ಹೆಚ್ಚು ಹಣಕಾಸಿನ ನೆರವು ದೊರಕಿ ಮಹಿಳೆಯರು ಸ್ವಾವಲಂಭಿಗಳಾಗಿ ಅವರ ಕುಟುಂಬಗಳನ್ನು ನಡೆಸುವ ಶಕ್ತಿ ಬರಬೇಕು ಎಂಬ ದೃಷ್ಟಿಯಲ್ಲಿ ಈ ಬಜೆಟ್ ನಲ್ಲಿ ಮಹಿಳೆಯರಿಗೆ ಒತ್ತು ನೀಡಲಾಗಿದೆ. ಇದನ್ನು ಸದುಪಯೋಗ ಮಾಡಿಕೊಳ್ಳುವಂತೆ ಮಹಿಳೆಯರಲ್ಲಿ ಅರಿವು ಮೂಡಿಸುವ ಕೆಲಸವನ್ನು ಮಾಡುವುದು ಜಿಲ್ಲಾಡಳಿತದ ಕರ್ತವ್ಯ. ಹಾಗಾಗಿ ಜಿಲ್ಲಾಡಳಿತ ಈ ಬಗ್ಗೆ ವಿಶೇಷ ಆಸಕ್ತಿ ವಹಿಸಿ ಮಹಿಳೆಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಎಂದರು.

      ಹತ್ತು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಮಿನಿ ವಿಧಾನ ಸೌಧದಲ್ಲಿ ಒಂದೇ ಸೂರಿನಡಿ ಸುಲಭವಾಗಿ ಸರಕಾರದ ಸೌಲಭ್ಯಗಳು ದೊರಕುತ್ತವೆ. ಇನ್ನು ನಗರ ಕಾರ್ಯಾಲಯದಿಂದ ನಗರ ವಾಸಿಗಳಿಗೆ ಸುಲಭವಾಗಿ ಸೌಲಭ್ಯಗಳು ದೊರಕಲಿದ್ದು, ಇಂದು ಉದ್ಘಾಟನೆಗೊಂಡಿರುವ ವಿವಿಧ ಕಟ್ಟಡಗಳಿಂದ ತಾಲೂಕಿನ ಕಾರ್ಯಕ್ಷಮತೆ ಹೆಚ್ಚುತ್ತದೆ ಎಂದರು.

      ಭ್ರಷ್ಟಾಚಾರ ತಡೆಗೆ ಜನ ಜಾಗೃತರಾಗಬೇಕು. ಅಧಿಕಾರಿಗಳು ಕಡತಗಳ ವಿಲೇವಾರಿಯಲ್ಲಿ ವಿಳಂಬ ಮಾಡಬಾರದು. ಆಗ ಭ್ರಷ್ಟಾಚಾರ ನಿಲ್ಲುತ್ತದೆ. ಈ ನಿಟ್ಟಿನಲ್ಲಿ ಬಿಗಿ ಕ್ರಮ ಕೈಗೊಳ್ಳಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.
ಪ್ರಮುಖ ವಾಣಿಜ್ಯ ಕೇಂದ್ರವಾದ ತಿಪಟೂರು ಕೊಬ್ಬರಿ ವಹಿವಾಟು ಹಾಗೂ ಶೈಕ್ಷಣಿಕ ಸಾಧನೆಗೂ ಪ್ರಸಿದ್ಧವಾಗಿದೆ. ಏಷ್ಯಾದಲ್ಲೇ ಅತಿ ದೊಡ್ಡ ಕೊಬ್ಬರಿ ಮಾರುಕಟ್ಟೆಯಾಗಿರುವ ತಿಪಟೂರಿನಿಂದಲೇ ರಾಜ್ಯದಲ್ಲಿನ ಕೊಬ್ಬರಿ ಬೆಲೆ ನಿಯಂತ್ರಣಗೊಳ್ಳುತ್ತದೆ ಎಂದು ತಿಳಿಸಿದರು.

      ಸಂಸದ ಜಿ.ಎಸ್. ಬಸವರಾಜ್ ಅವರು ಮಾತನಾಡಿ, ತುಮಕೂರು ಜಿಲ್ಲೆ ಹಾಗೂ ತಿಪಟೂರು ತಾಲ್ಲೂಕಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕಾಮಧೇನು ಇದ್ದ ಹಾಗೆ. ಹೇಮಾವತಿ ಎಡದಂಡೆ ಅಭಿವೃದ್ಧಿಗೆ 1 ಸಾವಿರ ಕೋಟಿ ಅನುದಾನ ನೀಡಿದರು. 400ಕೋಟಿ ಅನುದಾನ ಬಿಡುಗಡೆಯಾಗಿ ಕಾಮಗಾರಿಗಳು ಪೂರ್ಣಗೊಂಡಿವೆ. ಆದರೆ, ಉಳಿದ ಅನುದಾನ ಬಿಡುಗಡೆಯಾಬೇಕಿದೆ. ನೀರಾವರಿ ಅಭಿವೃದ್ದಿ ಹಿನ್ನೆಲೆಯಲ್ಲಿ ಎತ್ತಿನಹೊಳೆ ಯೋಜನೆ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಕೇಂದ್ರ ಸರ್ಕಾರ ನದಿ ಜೋಡಣೆ ಯೋಜನೆ ಅನುಷ್ಠಾನಕ್ಕೆ ತರಲು ಮುಂದಾಗಿದೆ. ಇದು ಅತ್ಯುತ್ತಮ ಯೋಜನೆ. ಇದನ್ನು ಮುಖ್ಯಮಂತ್ರಿಗಳು
ತ್ವರಿತವಾಗಿ ಜಾರಿಗೊಳಿಸಲು ಮುಂದಾಗಿದ್ದಾರೆ ಎಂದರು.

      ಪ್ರಧಾನಿ ನರೇಂದ್ರ ಮೋದಿ ಅವರು ಒಂದು ಬೆಳೆ ಒಂದು ಉತ್ಪನ್ನದ ಅಡಿ ಜಿಲ್ಲೆಯಲ್ಲಿ ತೆಂಗು ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿದ್ದಾರೆ. ಅಂತೆಯೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮದ್ಯಮಾರಾಟವನ್ನು ರಾಜ್ಯದಲ್ಲಿ ಸ್ಥಗಿತಗೊಳಿಸಿ ತೆಂಗು ನೀರಾ ಮಾರಾಟ ಯೋಜನೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅವರು ಮನವಿ ಮಾಡಿದರು.
ರಾಷ್ಟ್ರೀಯ ಹೆದ್ದಾರಿ 4 ಇದ್ದದ್ದು 48 ಅಗಿದೆ. ತುಮಕೂರಿನಿಂದ ಹಿಡಿದು ದೆಹಲಿ ಸಂಪರ್ಕ ಹೊಂದುವ ರಸ್ತೆಯಾಗಿ ಅಭಿವೃದ್ಧಿಗೊಂಡಿದೆ. ಅಂತಹ ರಸ್ತೆಗಳ ಅಭಿವೃದ್ಧಿಗೆ ಇನ್ನೂ ಹೆಚ್ಚಿನ ಆದ್ಯತೆ ನೀಡಬೇಕು. ತುಮಕೂರು ಜಿಲ್ಲೆಯಲ್ಲಿ ಮಹತ್ವದ ಕೈಗಾರಿಕೆಗಳು ಆರಂಭವಾಗುತ್ತಿವೆ. ತಿಪಟೂರು ಅಥವಾ ಮಧುಗಿರಿಯಲ್ಲಿ ಜವಳಿ ಪಾರ್ಕ್ ಸ್ಥಾಪಿಸಬೇಕಾಗಿದೆ ಎಂದು ಹೇಳಿದರು.

        ಅಧ್ಯಕ್ಷತೆ ವಹಿಸಿದ್ದ ಶಾಸಕ ಬಿ.ಸಿ. ನಾಗೇಶ್ ಮಾತನಾಡಿ, ತಿಪಟೂರು ತಾಲ್ಲೂಕಿನ ಅಭಿವೃದ್ಧಿಗೆ ಮುಖ್ಯಮಂತ್ರಿಗಳು ಹೆಚ್ಚು ಒತ್ತು ನೀಡಿದ್ದಾರೆ. ನೀರಾವರಿ ಸೇರಿದಂತೆ ಹಲವು ಯೋಜನೆಗಳನ್ನು ತಾಲೂಕಿಗೆ ನೀಡಿದ್ದಾರೆ ಎಂದರಲ್ಲದೇ ತಿಪಟೂರು ತಾಲ್ಲೂಕನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಣೆ ಮಾಡಬೇಕು. ತೋಟಗಾರಿಕ ಕಾಲೇಜು ಪ್ರಾರಂಭಿಸಬೇಕು ಎಂದು ಮನವಿ ಮಾಡಿದರು.

       ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ. ಗೌಡ, ಜಿ.ಪಂ. ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ, ಮಾಜಿ ವಿಧಾನ ಪರಿಷತ್ ಸದಸ್ಯ ಡಾ. ಎಂ.ಆರ್. ಹುಲಿನಾಯ್ಕರ್, ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ, ಜಿ.ಪಂ.ಸಿಇಓ ಜಿ.ಎಂ.ಗಂಗಾಧರಸ್ವಾಮಿ, ಕೇಂದ್ರವಲಯ ಐಜಿ ಚಂದ್ರಶೇಖರ್, ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಉಪವಿಭಾಗಾಧಿಕಾರಿ ದಿಗ್ವಿಜಯ್ ಬೋಡ್ಕೆ, ತಹಶೀಲ್ದಾರ್ ಚಂದ್ರಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ, ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ಸೇರಿದಂತೆ ಮತ್ತಿತರರು ಹಾಜರಿದ್ದರು.
ಅಭಿವೃದ್ಧಿ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದ್ದು,
ಸಾರ್ವಜನಿಕರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಕೋವಿಡ್ ತಡೆಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

       ನಾಲ್ಕು ಗೋಡೆಗಳ ಮಧ್ಯೆ ನಡೆಯುವ ಕಾರ್ಯಕ್ರಮಗಳಿಗೆ ಷರತ್ತು ಹಾಕಲಾಗಿದೆ. ಆದರೆ ಸಾರ್ವಜನಿಕವಾಗಿ ನಡೆಯುವ ಸಭೆಗಳಿಗೆ ಯಾವುದೇ ನಿಬಂಧನೆ ಹಾಕಿಲ್ಲ. ಸಾರ್ವಜನಿಕರು ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡಿಕೊಂಡು ಎಚ್ಚರಿಕೆಯಿಂದ ಇರಬೇಕು ಎಂದರು.

     ಸದ್ಯಕ್ಕೆ ಶಾಲಾ-ಕಾಲೇಜುಗಳನ್ನು ಬಂದ್ ಮಾಡುವ ಯೋಚನೆ ಇಲ್ಲ. ಮುಂದಿನ ಒಂದು ವಾರಗಳ ಕಾಲ ಕೊರೊನಾ ಸೋಂಕಿನ ಪ್ರಮಾಣ ಸುಧಾರಿಸದೇ ಇದ್ದರೆ, ಪರಿಸ್ಥಿತಿ ನೋಡಿಕೊಂಡು ತೀರ್ಮಾನ ಮಾಡಲಾಗುವುದು ಎಂದರು.

      ಹಣಕಾಸಿನ ಸುಧಾರಣೆಯನ್ನು ನೋಡಿಕೊಂಡು ತುಮಕೂರು ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡಲಾಗುವುದು. ಜತೆಗೆ ನೀರಾವರಿ ಯೋಜನೆಗೂ ಆದ್ಯತೆ ನೀಡಲಾಗುವುದು ಎಂದು ಅವರು ಹೇಳಿದರು.
ಇದಕ್ಕೂ ಮೊದಲು ತಿಪಟೂರು ತಾಲೂಕಿನ ಶ್ರೀ ಕೆರೆಗೋಡಿ ಶ್ರೀ ಪರದೇಶಿಕೇಂದ್ರ ಮಠದ ಅತಿಥಿ ಗೃಹ ಉದ್ಘಾಟನೆ ನೆರವೇರಿಸಿ, ಶ್ರೀಗಳ ಆಶೀರ್ವಾದ ಪಡೆದರು.

(Visited 55 times, 1 visits today)