ತುಮಕೂರು :
ಹಿಜಾಬ್ ವಸ್ತ್ರ ವಿಷಯವಾಗಿ ಜಿಲ್ಲೆಯಲ್ಲಿ ರಜೆ ಘೋಷಿಸಲಾಗಿದ್ದ ಪಾಲಿಟೆಕ್ನಿಕ್/ ಡಿಪ್ಲೋಮಾ, ಇಂಜಿನಿಯರಿಂಗ್ ಕಾಲೇಜು ಸೇರಿದಂತೆ ಪದವಿ ಪೂರ್ವ ಕಾಲೇಜು ಹಾಗೂ ಪದವಿ ಮತ್ತು ಮೇಲ್ಪಟ್ಟ ಕಾಲೇಜುಗಳು ಇಂದಿನಿಂದ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉಚ್ಚ ನ್ಯಾಯಾಲಯದ ಮಧ್ಯಂತರ ಆದೇಶವನ್ನು ಪಾಲಿಸದ ಕಾಲೇಜು ಆಡಳಿತ ಮಂಡಳಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಸೂಚನೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿಂದು ವಿವಿಧ ಕಾಲೇಜು ಆಡಳಿತ ಮಂಡಳಿ ಹಾಗೂ ಪೊಲೀಸ್ ಇಲಾಖಾಧಿಕಾರಿಗಳೊಂದಿಗೆ ಜûೂಮ್ ಸಭೆ ನಡೆಸಿ ಮಾತನಾಡಿದ ಅವರು ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅನುದಾನಿತ/ ಅನುದಾನರಹಿತ/ ಸರ್ಕಾರಿ ಕಾಲೇಜುಗಳು ಉಚ್ಚ ನ್ಯಾಯಾಲಯದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಆದೇಶವನ್ನು ಪಾಲಿಸುವಲ್ಲಿ ಆಯಾ ಕಾಲೇಜಿನ ಪ್ರಾಚಾರ್ಯರು, ಪ್ರಾಂಶುಪಾಲರು, ಆಡಳಿತ ಮಂಡಳಿಗಳೇ ಸಂಪೂರ್ಣ ಜವಾಬ್ದಾರಿ ಎಂದು ತಿಳಿಸಿದರು.
ಉಚ್ಚ ನ್ಯಾಯಾಲಯದ ಮಧ್ಯಂತರ ಆದೇಶ ಉಲ್ಲಂಘನೆ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಕಾಲೇಜಿನ ಸುತ್ತಮುತ್ತ 200 ಮೀಟರ್ ವ್ಯಾಪ್ತಿ ಪ್ರದೇಶದಲ್ಲಿ ಇಂದಿನಿಂದ ಮುಂದಿನ ಆದೇಶದವರೆಗೂ 144 ಸೆಕ್ಷನ್ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ. ನಿಷೇಧಾಜ್ಞೆ ಉಲ್ಲಂಘನೆಯಾದಲ್ಲಿ ಕಾಲೇಜಿನ ಮುಖ್ಯಸ್ಥರು ಸಂಬಂಧಿಸಿದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದರಲ್ಲದೆ, ವಿದ್ಯಾರ್ಥಿಗಳು, ಕಾಲೇಜಿನ ಬೋಧಕ/ಬೋಧಕೇತರ ಸಿಬ್ಬಂದಿ ವರ್ಗವನ್ನು ಹೊರತುಪಡಿಸಿ ಯಾವುದೇ ಪೋಷಕ/ ಪಾಲಕರಿಗೆ ನಿಷೇಧಿತ ಪ್ರದೇಶದೊಳಗೆ ಪ್ರವೇಶಕ್ಕೆ ಅವಕಾಶವಿಲ್ಲ ಎಂದು ತಿಳಿಸಿದರು.
ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಪರೀಕ್ಷೆ ಸಮೀಪಿಸುತ್ತಿರುವುದರಿಂದ ಜಿಲ್ಲೆಯಲ್ಲಿ ಶಾಂತಿ ಕಾಪಾಡುವುದು ಅತ್ಯಾವಶ್ಯಕವಿರುತ್ತದೆ. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಸಾರ್ವಜನಿಕರು ಸಹಕರಿಸಬೇಕು. ಉಚ್ಚ ನ್ಯಾಯಾಲಯದಲ್ಲಿ ಪ್ರಕರಣ ವಿಚಾರಣೆ ಹಂತದಲ್ಲಿರುವುದರಿಂದ ಯಾವುದೇ ರೀತಿಯ ಪ್ರಚೋದನಕಾರಿ ಹೇಳಿಕೆ/ ಅಭಿಪ್ರಾಯಗಳಿಗೆ ಅವಕಾಶವಿರುವುದಿಲ್ಲವೆಂದು ಅವರು ಸೂಚನೆ ನೀಡಿದರು.
ನಿಷೇಧಾಜ್ಞೆ ಅವಧಿಯಲ್ಲಿ ಕೆಲವು ಅವಶ್ಯಕ ಸಂದರ್ಭಗಳಲ್ಲಿ ಮಾತ್ರ ವಿದ್ಯಾರ್ಥಿಗಳ ಪಾಲಕರು/ಪೋಷಕರು, ಕಾಲೇಜಿನ ಪ್ರಾಂಶುಪಾಲರು ಹಾಗೂ ಆಡಳಿತ ಮಂಡಳಿಯ ಅನುಮತಿ ಪಡೆದು ಶಾಲೆಯ ಒಳಗೆ ಪ್ರವೇಶಿಸಲು ಅನುಮತಿ ನೀಡಲು ಅವಕಾಶವಿದೆ. ನಿಷೇಧಿತ ಪ್ರದೇಶದಲ್ಲಿರುವ ಎಲ್ಲಾ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಆದರೆ ಸದರಿ ಅಂಗಡಿಗಳಲ್ಲಿ ಹೆಚ್ಚಿನ ಜನ ಗುಂಪು ಗೂಡುವುದನ್ನು ನಿಷೇಧಿಸಲಾಗಿದೆ. ಹಾಗೂ ಯಾವುದೇ ಮತೀಯ ಭಾವನೆಗಳಿಗೆ ಭಂಗ ತರುವಂತಹ ಚಟುವಟಿಕೆಗಳು ನಡೆದಲ್ಲಿ ಸಂಬಂಧಪಟ್ಟ ಅಂಗಡಿ ಮಾಲೀಕರ ಮೇಲೆ ಕಾನೂನು ರೀತ್ಯಾ ಕ್ರಮವಹಿಸಲಾಗುವುದು. ನಿಷೇಧಿತ ಪ್ರದೇಶದಲ್ಲಿ 5 ಜನರ ಮೇಲ್ಪಟ್ಟು ಗುಂಪುಗಾರಿಕೆ ಮಾಡುವುದು, ಇತರೆ ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುವುದನ್ನು ನಿರ್ಬಂಧಿಸಲಾಗಿದೆ ಎಂದು ತಿಳಿಸಿದರು.
ನಿಷೇಧಾಜ್ಞೆ ಅವಧಿಯಲ್ಲಿ ಯಾವುದೇ ಸ್ಪೋಟಕ ವಸ್ತು ಮತ್ತು ಮಾರಕಾಸ್ತ್ರಗಳನ್ನು ಕೊಂಡೊಯ್ಯುವುದು ಅಥವಾ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಓಡಾಡುವಂತಿಲ್ಲ. ಯಾವುದೇ ಬಹಿರಂಗ ಪ್ರಚಾರ ಸಭೆ, ಸಮಾರಂಭ, ಮೆರವಣಿಗೆ ಮಾಡುವಂತಿಲ್ಲ. ನಿಷೇಧಾಜ್ಞೆಯನ್ನು ಉಲ್ಲಂಘಿಸಿದವರನ್ನು ಕೂಡಲೇ ಬಂಧಿಸಿ ಅವರ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಲು ಸೂಕ್ತ ಕ್ರಮವಹಿಸಲಾಗುವುದು ಎಂದು ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರ್ ವಾಡ್ ಮಾತನಾಡಿ, ಕಾಲೇಜು ಆಡಳಿತ ಮಂಡಳಿಗಳು ಮುಂಜಾಗ್ರತಾ ಕ್ರಮವಾಗಿ ಸ್ಥಳೀಯ ಪೊಲೀಸ್ ಠಾಣೆಯೊಂದಿಗೆ ಸಂಪರ್ಕ ಹೊಂದಿರಬೇಕು. ಯಾವುದೇ 3ನೇ ವ್ಯಕ್ತಿಯಿಂದ ದೂರುಗಳು ಬಾರದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ: ಕೆ. ವಿದ್ಯಾಕುಮಾರಿ, ಅಪರ ಜಿಲ್ಲಾಧಿಕಾರಿ ಕೆ. ಚೆನ್ನಬಸಪ್ಪ, ಮತ್ತಿತರರು ಉಪಸ್ಥಿತರಿದ್ದರು.