ತುಮಕೂರು: ದಿನೇ ದಿನೇ ಬಿಸಿಲಿನ ಝಳ ಹೆಚ್ಚಾಗುತ್ತಿರುವುದರಿಂದ ಪಡಿತರ ಧಾನ್ಯ ವಿತರಿಸಲು ನ್ಯಾಯಬೆಲೆ ಅಂಗಡಿಗಳು ಬೆಳಿಗ್ಗೆ ೬ ಗಂಟೆಯಿAದಲೇ ಕಾರ್ಯನಿರ್ವಹಿಸುವಂತೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಮಂಟೇಸ್ವಾಮಿ ಅವರಿಗೆ ಸೂಚನೆ ನೀಡಿದರು.
ಪಾವಗಡ ಪಟ್ಟಣದ ಶ್ರೀರಾಮಕೃಷ್ಣ ನ್ಯಾಯ ಬೆಲೆ ಅಂಗಡಿಗೆ ಭಾನುವಾರ ಬೆಳಿಗ್ಗೆ ಭೇಟಿ ನೀಡಿ ಕುಟುಂಬದ ಪ್ರತಿ ಸದಸ್ಯರಿಗೆ ೧೫ ಕೆ.ಜಿ. ಅಕ್ಕಿ ಸಮರ್ಪಕ ವಿತರಣೆ ಬಗ್ಗೆ ಪರಿಶೀಲಿಸಿ ಮಾತನಾ ಡಿದ ಅವರು, ಗಂಟೆಗಟ್ಟಲೆ ಬಿಸಿಲಿನಲ್ಲಿ ಕಾಯದೆ ಫಲಾನುಭವಿಗಳಿಗೆ ಅನುಕೂಲವಾಗುವಂತೆ ಎಲ್ಲಾ ನ್ಯಾಯಬೆಲೆ ಅಂಗಡಿಗಳನ್ನು ನಿಗಧಿತ ಸಮಯಕ್ಕಿಂತ ಒಂದು ಗಂಟೆ ಮುಂಚಿತವಾಗಿ ತೆರೆಯುವ ವ್ಯವಸ್ಥೆ ಮಾಡಬೇಕು ಎಂದು ಅಧಿಕಾ ರಿಗಳಿಗೆ ನಿರ್ದೇಶನ ನೀಡಿದರಲ್ಲದೆ, ಪಡಿತರ ಧಾನ್ಯ ಪಡೆಯಲು ನ್ಯಾಯಬೆಲೆ ಅಂಗಡಿ ಮುಂದೆ ಸಾಲು ಗಟ್ಟಿ ನಿಂತಿದ್ದ ಪಡಿತರ ಧಾನ್ಯದ ಗುಣಮಟ್ಟ ಹಾಗೂ ಕ್ರಮವಾಗಿ ವಿತರಿಸುತ್ತಿರುವ ಬಗ್ಗೆ ಫಲಾನುಭವಿಗಳಿಂದ ಮಾಹಿತಿ ಪಡೆದರು.
ನಂತರ ನಾಗಲಮಡಿಕೆ ಕ್ರಾಸ್ ಬಳಿ ಭೇಟಿ ನೀಡಿ ತುಂಗಭದ್ರಾ ಕುಡಿಯುವ ನೀರಿನ ಯೋಜನೆಯಡಿ ಪಟ್ಟಣ ಪ್ರದೇಶದಲ್ಲಿ ಪ್ರಾಯೋಗಿಕ ನೀರು ಸರಬರಾಜಾಗುತ್ತಿರುವ ಬಗ್ಗೆ ಸ್ಥಳ ಪರಿಶೀಲನೆ ಮಾಡಿದರು. ನೀರು ಸರಬರಾಜು ಮಾಡುವ ಪೈಪ್‌ಲೈನ್‌ನಲ್ಲಿ ಸೋರಿಕೆಯನ್ನು ಕಂಡ ಅವರು ಸಂಬAಧಿಸಿದ ಅಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರಲ್ಲದೆ, ಪೈಪ್‌ಲೈನ್ ಹೊಡೆದು ಹಾಕಿರುವವರಿಗೆ ತಕ್ಷಣವೇ ನೋಟಿಸ್ ನೀಡಬೇಕೆಂದು ಸೂಚನೆ ನೀಡಿದರು.
ಜನತೆಗೆ ಶುದ್ಧ ಕುಡಿಯುವ ನೀರು ಮನೆ ಮನೆಗೆ ಪೂರೈಕೆ ಮಾಡುವ ನಿಟ್ಟಿನಲ್ಲಿ ತುಂಗಭದ್ರಾ ಕುಡಿಯುವ ನೀರಿನ ಯೋಜನೆಯ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕೆಂದು ಅವರು ಸೂಚಿಸಿದರು. ನಂತರ ನಾಗಲಮಡಿಕೆ ಗ್ರಾಮದಲ್ಲಿ ಜೆಜೆಎಂ ಯೋಜನೆ ಹಾಗೂ ಪಿಎಂ ಆವಾಸ್ ವಸತಿ ಯೋಜನೆ ಕಾಮಗಾರಿ ಪ್ರಗತಿಯನ್ನು ಪರಿಶೀಲಿಸಿದರು.
ಪಾವಗಡ ತಾಲೂಕಿನ ತಿರುಮಣಿಯಲ್ಲಿರುವ ಸೌರಶಕ್ತಿ ಘಟಕಕ್ಕೆ ಭೇಟಿ ನೀಡಿ ಘಟಕದ ನಿರ್ವಹಣೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಪಾವಗಡ ತಾಲ್ಲೂಕು ನಾಗಲಮಡಿಕೆ ಹೋಬಳಿ ಶ್ರೀರಂಗಪುರ ತಾಂಡ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದ ಅವರು ಅಂಗನವಾಡಿಯಲ್ಲಿರುವ ಮಕ್ಕಳ ಸಂಖ್ಯೆ, ಪೌಷ್ಠಿಕ ಆಹಾರ ವಿತರಣೆ, ಮೂಲಭೂತ ಸೌಲಭ್ಯ ಕುರಿತು ಪರಿಶೀಲನೆ ನಡೆಸಿದರು. ಮಕ್ಕಳ ಕಲಿಕಾಸಕ್ತಿಯನ್ನು ವೃದ್ಧಿಸಲು ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಮಕ್ಕಳ ಆಟಿಕೆ, ಕಲಿಕಾ ಸಾಮಗ್ರಿಗಳನ್ನು ತಯಾರಿಸಿರುವ ಅಂಗನವಾಡಿ ಕಾರ್ಯಕರ್ತೆ ಸುಶೀಲಮ್ಮ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಪಾವಗಡ ವ್ಯಾಪ್ತಿಯ ಕೆ. ರಾಮಪುರ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ತುಮಕೂರು-ರಾಯದುರ್ಗ ರೈಲು ಮಾರ್ಗ ಕಾಮಗಾರಿ ಪ್ರಗತಿ ಕುರಿತು ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಮಧುಗಿರಿ ತಾಲ್ಲೂಕು ಎಂ. ಬಸವನಹಳ್ಳಿ ಅಂಗನವಾಡಿ ಕೇಂದ್ರವನ್ನು ವೀಕ್ಷಿಸಿದ ಅವರು, ನಂತರ ಚಿನಕವಜ್ರ ಗ್ರಾಮದಲ್ಲಿರುವ ಆಯುಷ್ಮಾನ್ ಆರೋಗ್ಯ ಮಂದಿರಕ್ಕೆ ಭೇಟಿ ಮಾಡಿ ಚಿಕಿತ್ಸಾ ವಿಧಾನಗಳನ್ನು ಗಮನಿಸಿದರು. ಸ್ವನಿಧಿ ಯೋಜನೆಯಡಿ ರಾಜ್ಯಮಟ್ಟದಿಂದ ಪ್ರಶಂಸೆ ದೊರೆತಿರುವ ಹಿನ್ನೆಲೆಯಲ್ಲಿ ಮಧುಗಿರಿಯ ಪುರಸಭೆಗೆ ಭೇಟಿ ನೀಡಿ ಅಧಿಕಾರಿ/ಸಿಬ್ಬಂದಿಗಳನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ, ತಹಶೀಲ್ದಾರರಾದ ಡಿ.ಎನ್ ವರದರಾಜು, ಶಿರಿನ್ ತಾಜ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಚೇತನ್ ಕುಮಾರ್ ಹಾಗೂ ಕಾರ್ಯಕ್ರಮ ನಿರೂಪಣಾಧಿಕಾರಿ ದಿನೇಶ್, ಕಂದಾಯ ನಿರೀಕ್ಷಕ ಕಿರಣ್ ಕುಮಾರ್, ಸಿಡಿಪಿಒ ಸುನಿತಾ, ಹಾಜರಿದ್ದರು.

(Visited 1 times, 1 visits today)