ತುಮಕೂರು: ಗ್ರಾಮೀಣ ಪ್ರದೇಶಗಳಲ್ಲಿ ಬಸ್ ಸಂಚಾರ ಸಮಸ್ಯೆ ಹೆಚ್ಚಾಗಿದೆ. ಸರ್ಕಾರ ಜನಸಾಮಾನ್ಯರ ಕಡೆಗೆ ಗಮನ ಹರಿಸುತ್ತಿಲ್ಲ. ಈ ಪರಿಣಾಮವಾಗಿ ಗ್ರಾಮೀಣ ಭಾಗದಲ್ಲಿ ಅಪಘಾತಗಳು ದುಪ್ಪಟ್ಟಾಗುತ್ತಿವೆ. ಪಾವಗಡದಲ್ಲಿ ಆಗಿರುವ ದುರಂತಕ್ಕೆ ಸರ್ಕಾರವೆ ನೇರ ಹೊಣೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದರು.

ನಗರದ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಅವರು, ಕೋವಿಡ್ ನಂತರದಲ್ಲಿ ಬಹಳಷ್ಟು ಕೆ.ಎಸ್.ಆರ್.ಟಿ.ಸಿ. ಬಸ್‍ಗಳನ್ನು ಸ್ಥಗಿತಗೊಳಿಸಲಾಗಿತ್ತು. ಇದರ ಹಿಂದೆಯೇ ಕೆ.ಎಸ್.ಆರ್.ಟಿ.ಸಿ. ನೌಕರ ವರ್ಗ ಪ್ರತಿಭಟನೆ ಮಾಡಿದ ಹಿನ್ನೆಲೆಯಲ್ಲಿ ಹಲವರನ್ನು ಅಮಾನತು ಮಾಡಲಾಯಿತು. ಕೋವಿಡ್ ನೆಪ ಮಾಡಿಕೊಂಡು ಸರ್ಕಾರ ಕೆ.ಎಸ್.ಆರ್.ಟಿ.ಸಿ. ಬಸ್‍ಗಳನ್ನು ಗ್ರಾಮೀಣ ಪ್ರದೇಶಗಳಿಗೆ ಹೆಚ್ಚಾಗಿ ಹಾಕುತ್ತಿಲ್ಲ. ಇದರಿಂದಾಗಿ ಹೆಚ್ಚು ಅವಘಡಗಳು ಸಂಭವಿಸುತ್ತಿವೆ ಎಂದರು.

ಗ್ರಾಮೀಣ ಪ್ರದೇಶಗಳಲ್ಲಿ ಜನರು ನಿತ್ಯವೂ ತಮ್ಮ ಹೊಟ್ಟೆ ಪಾಡಿಗಾಗಿ ಊರಿಂದ ಊರಿಗೆ ಪ್ರಯಾಣ ಬೆಳೆಸಿ ದುಡಿದು ತಿನ್ನುತ್ತಾರೆ. ದಿನವೂ ದುಡಿದು ತಿನ್ನುವ ಜನರಿಗೆ ಸರ್ಕಾರ ಸವಲತ್ತುಗಳನ್ನು ನೀಡುತ್ತಿಲ್ಲ‌. ಅವರಿಗೆ ಮೂಲ ಸೌಲಭ್ಯಗಳನ್ನು ಕಲ್ಪಿಸಿಕೊಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ತಿಳಿಸಿದರು.

(Visited 22 times, 1 visits today)