ತುಮಕೂರು :

      ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆಯ ಅಂಗವಾಗಿ ನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿಂದು ಗಾಂಧೀಜಿಯವರ ಜೀವನಚರಿತ್ರೆ ಕುರಿತ ಛಾಯಾಚಿತ್ರ ಪ್ರದರ್ಶನವನ್ನು ಶಾಸಕ ಜಿ.ಬಿ ಜ್ಯೋತಿಗಣೇಶ್ ಹಾಗೂ ಜಿಲ್ಲಾಧಿಕಾರಿ ಡಾ|| ರಾಕೇಶ್‍ಕುಮಾರ್ ಅವರು ಚಾಲನೆ ನೀಡಿದರು.ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಶಾಸಕ ಜಿ.ಬಿ ಜ್ಯೋತಿಗಣೇಶ್ ಅವರು ಕರ್ನಾಟಕದಲ್ಲಿ ಗಾಂಧೀಜಿಯವರ ಅಪರೂಪದ ಛಾಯಾಚಿತ್ರಗಳನ್ನು ಬಸ್ ನಿಲ್ದಾಣದಲ್ಲಿ ಪ್ರದರ್ಶನಗೊಂಡಿವೆ. ಪ್ರದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಬರುತ್ತಿದ್ದಾರೆ.

      ಗಾಂಧೀಜಿಯವರ ಜೀವನ ಮೌಲ್ಯಗಳು ಹಾಗೂ ಅವರ ಹೋರಾಟಗಳ ಅಪರೂಪದ ಛಾಯಾಚಿತ್ರ ವೀಕ್ಷಿಸುವ ಮೂಲಕ ಗಾಂಧೀಜಿಯವರ ಸ್ಮರಣೆ ಮಾಡಿಕೊಳ್ಳಬಹುದು ಎಂದರು.ಪ್ರದರ್ಶನ ವೀಕ್ಷಿಸಿದ ಜಿಲ್ಲಾಧಿಕಾರಿ ಡಾ|| ರಾಕೇಶ್‍ಕುಮಾರ್ ಅವರು ಮಾತನಾಡಿ, ಗಾಂಧೀಜಿ ಅವರ ಜೀವನ ಸಾಧನೆಗಳ ಅಪರೂಪದ ಛಾಯಾಚಿತ್ರಗಳನ್ನು ಪ್ರದರ್ಶಿಸಲಾಗಿದೆ. ಎಲ್ಲರಿಗೂ ಇದೊಂದು ಸದಾವಕಾಶವಾಗಿದೆ. ಸತ್ಯ ಅಹಿಂಸೆಯ ಮೂಲಕ ಸ್ವಾತಂತ್ರ್ಯ ಹೋರಾಟ ಹಾಗೂ ಅಪಾರ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ತೋರಿಸಿದ ಮಹಾತ್ಮ ಗಾಂಧೀಜಿ ಅವರ ಸ್ಮರಣೆ ಸದಾಕಾಲವೂ ನಮಗೆಲ್ಲ ಪ್ರೇರಣೆದಾಯಕವಾಗಿದೆ. ಗಾಂಧೀಜಿಯವರ ಕನಸನ್ನು ನನಸಾಗಿಸುವಲ್ಲಿ ಯುವಕರು ಕೈಜೋಡಿಸಬೇಕು ಎಂದು ತಿಳಿಸಿದರು.

      ಈ ಸಂದರ್ಭದಲ್ಲಿ ಕೆಎಸ್ಸಾರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಗಜೇಂದ್ರಕುಮಾರ್, ವಿಭಾಗೀಯ ಸಂಚಾಲಕ ಫಕ್ರುದ್ದೀನ್, ಬಸ್ ನಿಲ್ದಾಣಾಧಿಕಾರಿ ಶಿವಕುಮಾರ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಡಿ. ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು. ಪ್ರದರ್ಶನವು ಇಂದಿನಿಂದ ಅಕ್ಟೋಬರ್28ರವರೆಗೆ ನಡೆಯಲಿದೆ.

      ಪ್ರದರ್ಶನಕ್ಕೆ ಮೆಚ್ಚುಗೆ:- ಸ್ವಾತಂತ್ರ್ಯ ಸಂಗ್ರಾಮದ ಕಾಲಘಟ್ಟಗಳಲ್ಲಿ ಮಹಾತ್ಮಾ ಗಾಂಧೀಜಿ ಅವರು ಕರ್ನಾಟಕಕ್ಕೆ ಭೇಟಿ ನೀಡಿದ ಪ್ರದೇಶಗಳು, ಅಸ್ಪೃಶ್ಯತೆ ನಿವಾರಣೆಗಾಗಿ ಗಾಂಧೀಜಿ ನಡೆಸಿದ ಆಂದೋಲನ, 1924ರಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಅಖಿಲ ಭಾರತ ಕಾಂಗ್ರೇಸ್ ಅಧಿವೇಶನ ಸೇರಿದಂತೆ ಅವರ ಜೀವನ ಚರಿತ್ರೆಯ ಅಪರೂಪದ ಛಾಯಾಚಿತ್ರಗಳನ್ನು ಪ್ರದರ್ಶನದಲ್ಲಿ ಇಡಲಾಗಿತ್ತು. ಈ ವಿಶೇಷ ಛಾಯಾಚಿತ್ರ ಪ್ರದರ್ಶನ ಕುರಿತಂತೆ ಅಭಿಪ್ರಾಯ ವ್ಯಕ್ತಪಡಿಸಿದ ಕೆಲ ವಿದ್ಯಾರ್ಥಿಗಳು ಛಾಯಾಚಿತ್ರ ಪ್ರದರ್ಶನವು ಗಾಂಧೀಜಿಯವರ ಜೀವನದ ಕೆಲವು ಮಹತ್ವದ ಕಾಲಘಟ್ಟವನ್ನು ಅರಿತುಕೊಳ್ಳಲು ಸಹಕಾರಿಯಾಯಿತು ಎಂದರು.

(Visited 18 times, 1 visits today)